ಕಾಲ್ತುಳಿತ ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಸರ್ಕಾರ ಆದೇಶ; ಮೃತರ ಬಂಧುಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿರುವ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಪ್ರಕಟಿಸಿದೆ.
ಕಾಲ್ತುಳಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲದವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ಘಟನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ದುರಂತ ಸಂಭವಿಸಿದೆ. ಇಂತಹ ದೊಡ್ಡ ದುರಂತ ಸಂಭವಿಸಬಾರದಿತ್ತು. ಇದರಿಂದ ತುಂಬ ದುಃಖವಾಗುತ್ತಿದೆ ಎಂದರು.
ಕಾಲ್ತುಳಿತಡಲ್ಲಿ ಮೃತಪಟ್ಟ 11 ಮಂದಿಯ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಸಿಎಂ ಪ್ರಕಟಿಸಿದರು. ಈ ಘಟನೆಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದ ಅವರು, ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿರುವುದಾಗಿ ತಿಳಿಸಿದರು.