ನಿಖಿಲ್ ನೇಮಕ ಪ್ರಸ್ತಾಪಕ್ಕೆ ಅಪಸ್ವರ; ಚುನಾವಣಾ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಗೆ ನಾಯಕರ ಒಲವು

ಬೆಂಗಳೂರು: ಜಾತ್ಯತೀತ ಜನತಾ ದಳ (ಜೆಡಿಎಸ್) ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಎಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸಲಾಗುತ್ತದೆ ಎಂದು ಪಕ್ಷದ ರಾಜ್ಯಅಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಕೇಂದ್ರ ಸಚಿವರೂ ಆದ ಕುಮಾರಸ್ವಾಮಿ, ಪಕ್ಷದ ಪ್ರಧಾನ ಕಚೇರಿ ಜೆ.ಪಿ.ಭವನದಲ್ಲಿ ಚುನಾಯಿತ ಪ್ರತಿನಿಧಿಗಳು, ಮುಖಂಡರ ಸಭೆ ನಡೆಸಿದರು. ಈ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಎಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಕೈಗೊಳ್ಳಲಾಯಿತು.
ಸಭೆಯ ನಂತರ ಈ ಕುರಿತಂತೆ ಎಚ್.ಡಿ. ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮೂಲಕ ಆಯ್ಕೆ ಮಾಡುವ ತೀರ್ಮಾನ ಆಗಿದೆ. ಆದರೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಅವರು ತಿಳಿಸಿದರು.
ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿಯವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆದಿದೆ. ಆದರೆ ಕುಮಾರಸ್ವಾಮಿ ಪುತ್ರನನ್ನೇ ಯಾಕೆ ಉನ್ನತ ಹುದ್ದೆಗೆ ಆಯ್ಕೆ ಮಾಡಬೇಕು ಎಂಬ ಆಕ್ಷೇಪವೂ ಜೆಡಿಎಸ್ ನಾಯಕರಿಂದ ವ್ಯಕ್ತವಾಗಿದೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮೂಲಕ ಆಯ್ಕೆ ಮಾಡುವ ಬಗ್ಗೆ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.