ರಾಜ್ಯಸಭೆಗೆ ದೇವೇಗೌಡ ಮರು ಆಯ್ಕೆಗೆ ಮೈತ್ರಿ ಕಸರತ್ತು, ಪ್ರಧಾನಿ ನಿರ್ಧಾರದತ್ತ ಜೆಡಿಎಸ್ ಚಿತ್ತ

0
HDD - Devegowda

ಬೆಂಗಳೂರು: ಕರ್ನಾಟಕದಿಂದ ತೆರವಾಗಲಿರುವ ನಾಲ್ಕು ರಾಜ್ಯಸಭಾ ಸ್ಥಾನಗಳ ಪೈಕಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಮತ್ತೆ ರಾಜ್ಯಸಭೆಗೆ ಕಳುಹಿಸುವ ಕುರಿತು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದಲ್ಲಿ ಚರ್ಚೆಗಳು ಜೋರಾಗಿವೆ.

ಪ್ರಸ್ತುತ ವಿಧಾನಸಭೆಯ ಸಂಖ್ಯಾಬಲದ ಲೆಕ್ಕಾಚಾರ ಪ್ರಕಾರ, ಒಬ್ಬ ಅಭ್ಯರ್ಥಿ ಗೆಲ್ಲಲು ಕನಿಷ್ಠ 45 ರಿಂದ 46 ಮತಗಳ ಅಗತ್ಯವಿದೆ. ಕಾಂಗ್ರೆಸ್ ಬಳಿ 136 ಶಾಸಕರ ಬಲವಿದ್ದು, ಪಕ್ಷವು ಮೂರು ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ಸ್ಥಿತಿಯಲ್ಲಿದೆ.

ಇನ್ನೊಂದೆಡೆ ಬಿಜೆಪಿ ಬಳಿ 63 ಹಾಗೂ ಜೆಡಿಎಸ್ ಬಳಿ 18 ಶಾಸಕರಿದ್ದು, ಮೈತ್ರಿಕೂಟದ ಒಟ್ಟು ಬಲ 81ಕ್ಕೆ ತಲುಪುತ್ತದೆ. ಹೀಗಾಗಿ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ. ದೇವೇಗೌಡರನ್ನು ಕಣಕ್ಕಿಳಿಸಿದರೆ ಅವರ ಗೆಲುವು ಬಹುತೇಕ ಖಚಿತ ಎನ್ನಲಾಗುತ್ತಿದೆ.

ದೇವೇಗೌಡರ ರಾಜಕೀಯ ಅನುಭವ, ಹಿರಿತನ ಮತ್ತು ರಾಷ್ಟ್ರೀಯ ಮಟ್ಟದ ಪ್ರಭಾವವನ್ನು ಪರಿಗಣಿಸಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಬೇಕು ಎಂಬ ಅಭಿಪ್ರಾಯ ಜೆಡಿಎಸ್ ವಲಯದಲ್ಲಿ ವ್ಯಕ್ತವಾಗಿದೆ. ಈ ಸಂಬಂಧ ಜೆಡಿಎಸ್ ನಾಯಕರು ಈಗಾಗಲೇ ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಕಸರತ್ತು ಆರಂಭಿಸಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ದೇವೇಗೌಡರ ರಾಜ್ಯಸಭೆ ಮರು ಆಯ್ಕೆ ಕುರಿತ ಅಂತಿಮ ತೀರ್ಮಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಡಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಯಾವುದೇ ಷರತ್ತು ಅಥವಾ ಒತ್ತಡ ಹೇರದೆ, ಪ್ರಧಾನಿ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಪಕ್ಷ ಬದ್ಧವಾಗಿರುತ್ತದೆ ಎಂಬ ಸಂದೇಶವನ್ನು ಜೆಡಿಎಸ್ ನೀಡಿದೆ.

Leave a Reply

Your email address will not be published. Required fields are marked *