ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

0
smvt-300x169-1

ಬೆಂಗಳೂರು: ಅಕ್ರಮ ವಲಸಿಗರ ವಿರುದ್ಧ ಬೆಂಗಳೂರು ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಯ ಮುಂದುವರಿದ ಭಾಗವಾಗಿ, ನಗರದ ವಿವಿಧೆಡೆ ವಶಕ್ಕೆ ಪಡೆಯಲಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಸೋಮವಾರ ಗಡಿಪಾರು ಪ್ರಕ್ರಿಯೆಗಾಗಿ ಕಳುಹಿಸಲಾಗಿದೆ.

ನಗರದ 10 ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಶಕ್ಕೆ ಪಡೆಯಲಾಗಿದ್ದ ಇವರನ್ನು ಎಸ್‌ಎಂವಿಟಿ ಬೆಂಗಳೂರು ರೈಲು ನಿಲ್ದಾಣದಿಂದ ಪಶ್ಚಿಮ ಬಂಗಾಳದ ಮಾಲ್ಡಾ ರೈಲು ನಿಲ್ದಾಣಕ್ಕೆ ರೈಲಿನಲ್ಲಿ ಕರೆದೊಯ್ಯಲಾಯಿತು.

31 ಮಂದಿಯನ್ನು 20 ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ಕರೆದೊಯ್ದಿದ್ದು, ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಮಾಲ್ಡಾ ತಲುಪುವ ನಿರೀಕ್ಷೆಯಿದೆ. ಬಳಿಕ ಅಲ್ಲಿಂದ ಮುಂದಿನ ಗಡಿಪಾರು ಪ್ರಕ್ರಿಯೆ ನಡೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಎಂ. ನಾರಾಯಣ ಈ ಕುರಿತು ಮಾಹಿತಿ ನೀಡಿದ್ದು, ಅಕ್ರಮ ವಲಸಿಗರ ವಿರುದ್ಧದ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ, ಅಕ್ರಮ ವಲಸಿಗರ ಕುರಿತು ಮಾಹಿತಿ ಇದ್ದರೆ ಪೊಲೀಸರಿಗೆ ತಿಳಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಆದರೆ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ನಗರದ ವಿವಿಧೆಡೆ ವಾಸಿಸುತ್ತಿರುವ ಶಂಕಿತ ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವ ‘ಆಪರೇಷನ್ ಮುಕ್ತ’ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *