‘ಕರ್ನಾಟಕದ ರಾಜಕಾರಣಕ್ಕೆ ಕರಾಳ ಇತಿಹಾಸ ಬರೆಯಲೆಂದೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ’: ಬಿವೈವಿ

eswarappa vijayendra

ಬೆಂಗಳೂರು: ಅಕ್ರಮ ಆಸ್ತಿ ಕುರಿತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ಹಿಂದಿನ ಸರ್ಕಾರ ಆದೇಶಿಸಿದ್ದ ಸಿಬಿಐ ತನಿಖೆಯ ತೀರ್ಮಾನವನ್ನು ಸಿದ್ದರಾಮಯ್ಯ ಸರ್ಕಾರ ಹಿಂಪಡೆಯುವ ನಿರ್ದಾರ ಕೈಗೊಂಡಿದೆ. ಈ ವಿಚಾರದಲ್ಲಿ ಆಡಳಿತ ಪ್ರತಿಪಕ್ಷ ನಾಯಕರ ನಡುವೆ ವಾಗ್ದಾಳಿ ಆರಂಭವಾಗಿದೆ.

ಸಂಪುಟ ಸಭೆಯಲ್ಲಿ ಡಿಕೆಶಿ ಕೇಸ್ ವಾಪಸ್ ಪಡೆಯುವ ಬಗ್ಗೆ ತೀರ್ಮಾನಿಸಿರುವ ಸಿದ್ದರಾಮಯ್ಯ ಸರ್ಕಾರದ ನಡೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕರ್ನಾಟಕದ ರಾಜಕಾರಣಕ್ಕೆ ಕರಾಳ ಇತಿಹಾಸ ಬರೆಯಲೆಂದೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿ ಅಭಿಪ್ರಾಯ ಹಂಚಿಕೊಂಡಿರುವ ಅವರು, ಸಂವಿಧಾನದ ಘನತೆ, ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿಯುವ ನಿಟ್ಟಿನಲ್ಲಿ ತನ್ನದಲ್ಲದ ತಪ್ಪಿಗೂ ನೈತಿಕ ಹೊಣೆ ಹೊತ್ತು ಅಧಿಕಾರ ತ್ಯಾಗಮಾಡಿದ ಹಲವು ಮಹನೀಯರು ಗೌರವದ ರಾಜಕಾರಣಕ್ಕೆ ಇತಿಹಾಸ ಬರೆದು ಹೋಗಿದ್ದಾರೆ ಎಂದಿದ್ದಾರೆ.

ಕರ್ನಾಟಕದ ರಾಜಕಾರಣಕ್ಕೆ ಕರಾಳ ಇತಿಹಾಸ ಬರೆಯಲೆಂದೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತನ್ನ ಸಂಪುಟ ಸದಸ್ಯ ಡಿ.ಕೆ.ಶಿವಕುಮಾರ್ ಮೇಲಿರುವ ಸಿಬಿಐ ತನಿಖೆಯ ಕೇಸ್ ಹಿಂತೆಗೆದು ಕೊಳ್ಳುವ ನಿಲುವು ತಳೆದಿರುವುದು ಸಾಂವಿಧಾನಿಕ ಹಾಗೂ ಪ್ರಜಾತಂತ್ರ ವ್ಯವಸ್ಥೆಯ ಮೇಲೆ ಸವಾರಿ ಮಾಡಿದ ಕ್ರಮವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಇದೇ ವೇಳೆ, ಮತ್ತೊಂದು ಟ್ವೀಟ್‌ನಲ್ಲೂ ವಿಜಯೇಂದ್ರ ಅವರು ರಾಜ್ತ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಕ್ರಮ ಆಸ್ತಿಗಳ ಆರೋಪದ ಮೇಲೆ ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಯನ್ನು ಹಠಾತ್ತನೆ ಅಂತ್ಯಗೊಳಿಸಿದ ಕರ್ನಾಟಕ ಸರ್ಕಾರದ ಖಂಡನೀಯ ಕ್ರಮವು ಭ್ರಷ್ಟಾಚಾರವನ್ನು ರಕ್ಷಿಸುವ ಮತ್ತು ಸಕ್ರಿಯವಾಗಿ ಪೋಷಿಸುವ ಕಾಂಗ್ರೆಸ್‌ನ ನಿರ್ಲಜ್ಜ ನಿರ್ಣಯವನ್ನು ಸ್ಪಷ್ಟವಾಗಿ ಬಹಿರಂಗಪಡಿಸುತ್ತದೆ ಎಂದಿದ್ದಾರೆ.

ಈ ನಿರ್ಧಾರವು ನಿಷ್ಪಕ್ಷಪಾತ ತನಿಖೆಗೆ ರಾಜ್ಯದ ನಿಜವಾದ ಸಮರ್ಪಣೆಯ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕುತ್ತದೆ, ಸರ್ಕಾರವು ತನ್ನದೇ ಆದ ಶ್ರೇಣಿಯಲ್ಲಿನ ಭ್ರಷ್ಟಾಚಾರವನ್ನು ಭಯಾನಕವಾಗಿ ಮರೆಮಾಚುತ್ತಿದೆಯೇ ಎಂಬ ಪ್ರಶ್ನಾರ್ಥಕ ಚಿಹ್ನೆಯನ್ನು ಬಿಟ್ಟುಬಿಡುತ್ತದೆ ಎಂದಿರುವ ವಿಜಯೇಂದ್ರ, ಈ ದಿಟ್ಟ ಕ್ರಮವು ನ್ಯಾಯದ ಅನ್ವೇಷಣೆಯನ್ನು ಗಂಭೀರವಾಗಿ ದುರ್ಬಲಗೊಳಿಸುವುದಲ್ಲದೆ, ಡಿಕೆ ಶಿವಕುಮಾರ್ ವಿರುದ್ಧದ ಗಂಭೀರ ಆರೋಪಗಳನ್ನು ಪರಿಹರಿಸುವಲ್ಲಿ ಪಾರದರ್ಶಕತೆ ಮತ್ತು ಸಮಗ್ರತೆಯನ್ನು ನಾಚಿಕೆಯಿಲ್ಲದೆ ಹಾಳುಮಾಡುತ್ತದೆ ಎಂದಿದ್ದಾರೆ.

ಅತ್ತ, ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಉಪಮುಖ್ಯಮಂತ್ರಿ ರಾಜ್ಯ ಸರ್ಕಾರ ಲೂಟಿಕೋರರನ್ನು ರಕ್ಷಿಸಲು ಮುಂದಾಗಿದೆ ಎಙದು ಬಣ್ಣಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿಯವರ ವಿರುದ್ದ ಗಂಭೀರ ಆರೋಪ ಇರುವುದು. ಹಾಗಾಗಾಇ ಅಷ್ಟು ಸುಲಭವಾಗಿ‌ ಕಾನೂನಿನಿಂದ ಪಾರಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸಂಪುಟ ಸಭೆ ಕರೆದು ನಿರ್ಧಾರವನ್ನು ಪುನರ್‌ ಪರಿಶೀಲಿಸಲಿ ಎಂದು ಈಶ್ವರಪ್ಪ ಮನವಿ‌ ಮಾಡಿದ್ದಾರೆ.