ಸೆಪ್ಟೆಂಬರ್ 18-19ರಂದು ರಾಜ್ಯ ಮಟ್ಟದ ಕಾಫಿ ಬೆಳೆಗಾರರ ಬೃಹತ್ ಸಮಾವೇಶ

ಚಿಕ್ಕಮಗಳೂರು: ಕಾಫಿ ಬೆಳೆಗಾರರ ಸಂಘ ಹಾಗೂ ಟೆಂಡರ್ ಟುಡೆ ಗ್ರೂಪ್ ಸಹಯೋಗದಲ್ಲಿ ಸೆಪ್ಟೆಂಬರ್ 18 ಮತ್ತು 19ರಂದು ಚಿಕ್ಕಮಗಳೂರಿನ ಒಕ್ಕಲಿಗರ ಸಮುದಾಯ ಭವನದಲ್ಲಿ ರಾಜ್ಯ ಮಟ್ಟದ ಕಾಫಿ ಬೆಳೆಗಾರರ ಬೃಹತ್ ತಾಂತ್ರಿಕ ಸಮಾವೇಶ ಮತ್ತು ವಿಚಾರ ಸಂಕಿರಣ ಆಯೋಜಿಸಲಾಗಿದೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಟೆಂಡರ್ ಟುಡೆ ಗ್ರೂಪ್ ಅಧ್ಯಕ್ಷ ಶ್ರೀಹರಿ ಎನ್. ಗೌರಿಪುರ, ಸಮಾವೇಶದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾಗವಹಿಸಲಿದ್ದು, 80ಕ್ಕೂ ಹೆಚ್ಚು ಕಂಪನಿಗಳು ತಮ್ಮ ಉತ್ಪನ್ನಗಳು ಮತ್ತು ತಾಂತ್ರಿಕ ಆವಿಷ್ಕಾರಗಳನ್ನು ಪ್ರದರ್ಶಿಸಲಿವೆ ಎಂದು ತಿಳಿಸಿದರು.
ಕಾಫಿ ಬೆಳೆಗಾರರಿಗೆ ಉಪಯುಕ್ತವಾಗುವ ನೂತನ ತಂತ್ರಜ್ಞಾನ, ಯಂತ್ರೋಪಕರಣಗಳು ಹಾಗೂ ಆಧುನಿಕ ಕೃಷಿ ವಿಧಾನಗಳ ಕುರಿತು ಪ್ರಾತ್ಯಕ್ಷಿಕೆಗಳನ್ನು ಆಯೋಜಿಸಲಾಗುವುದು. ಇತ್ತೀಚಿನ ದಿನಗಳಲ್ಲಿ ಕಾಫಿ ತೋಟಗಳಲ್ಲಿ ಎದುರಾಗುತ್ತಿರುವ ಕಾರ್ಮಿಕರ ಕೊರತೆಗೆ ಪರಿಹಾರವಾಗುವ ಯಂತ್ರೋಪಕರಣಗಳ ಪ್ರದರ್ಶನವೂ ಸಮಾವೇಶದ ಪ್ರಮುಖ ಆಕರ್ಷಣೆಯಾಗಿರಲಿದೆ ಎಂದು ಹೇಳಿದರು.

ಮಡಿಕೇರಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಯ ಕಾಫಿ ಬೆಳೆಗಾರರ ಸಂಘಗಳು ಈ ಕಾರ್ಯಕ್ರಮಕ್ಕೆ ಸಹಯೋಗ ನೀಡುತ್ತಿವೆ. ರಾಜ್ಯದ ವಿವಿಧ ಭಾಗಗಳ ಕಾಫಿ ಬೆಳೆಗಾರರು, ತಜ್ಞರು ಮತ್ತು ಉದ್ಯಮ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಪತ್ರಿಕಾಗೋಷ್ಠಿಯಲ್ಲಿ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಕೆ.ಯು. ರತೀಶ್ ಕುಮಾರ್ ಹಾಗೂ ಕಾರ್ಯದರ್ಶಿ ಕೆರೆಮಕಿ ಮಹೇಶ್ ಉಪಸ್ಥಿತರಿದ್ದರು.
