ಮಂಡ್ಯದಲ್ಲಿ ಮಳೆ ಕೊರತೆ; 24,123 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ

0
Chaluvarayaswamy-Cheluvarayaswamy-300x196-1

ಮಂಡ್ಯ: ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆ, ಬೆಳೆಗಳ ಸ್ಥಿತಿಗತಿ ಹಾಗೂ ಕೆರೆಗಳಲ್ಲಿನ ನೀರಿನ ಲಭ್ಯತೆ ಕುರಿತು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಸಚಿವ ಪಿ.ಎಂ. ನರೇಂದ್ರಸ್ವಾಮಿ ಉಪಸ್ಥಿತರಿದ್ದರು.

ಸಭೆಯಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ಮಳೆ ಕೊರತೆ ಹಾಗೂ ಹವಾಮಾನ ವೈಪರೀತ್ಯದಿಂದ ರೈತರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೃಷಿ ಪರಿಕರಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ ಗ್ರಾಮಗಳನ್ನು ಮುಂಚಿತವಾಗಿ ಗುರುತಿಸಿ ಪರ್ಯಾಯ ವ್ಯವಸ್ಥೆ ಮಾಡಬೇಕು. ಕೃಷಿ ಮತ್ತು ಕಂದಾಯ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ, ಪೂರ್ವ ಮುಂಗಾರು ಮಳೆ ಕೊರತೆಯಿಂದ 6,175 ಹೆಕ್ಟೇರ್ ಪ್ರದೇಶದಲ್ಲಿ ಶೇ.31.83ರಷ್ಟು ಮಾತ್ರ ಬಿತ್ತನೆಯಾಗಿದೆ. ಮುಂಗಾರು ಹಂಗಾಮಿನಲ್ಲೂ ಮಳೆ ಕೊರತೆ ಮುಂದುವರಿದಿದ್ದು, 17,948 ಹೆಕ್ಟೇರ್ ಪ್ರದೇಶದಲ್ಲಿ ಶೇ.9.57ರಷ್ಟು ಮಾತ್ರ ಬಿತ್ತನೆಯಾಗಿದೆ ಎಂದು ಮಾಹಿತಿ ನೀಡಿದರು.

ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮುಗಳನ್ನು ಒಟ್ಟಾಗಿ ಪರಿಗಣಿಸಿದರೆ, ಕಳೆದ ವರ್ಷ ಇದೇ ಅವಧಿಯಲ್ಲಿ 61,685 ಹೆಕ್ಟೇರ್‌ನಲ್ಲಿ ಶೇ.32.1ರಷ್ಟು ಬಿತ್ತನೆಯಾಗಿತ್ತು. ಪ್ರಸಕ್ತ ಸಾಲಿನಲ್ಲಿ 24,123 ಹೆಕ್ಟೇರ್‌ನಲ್ಲಿ ಶೇ.11.7ರಷ್ಟು ಮಾತ್ರ ಬಿತ್ತನೆಯಾಗಿದೆ ಎಂದರು.

ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ನಿಂದ ಜುಲೈ ಮೂರನೇ ವಾರದಲ್ಲಿ ನೀರು ಹರಿಸಲಾಗಿದ್ದು, ಅಚ್ಚುಕಟ್ಟು ಪ್ರದೇಶದ ಬೆಳೆಗಳು ಅಲ್ಪ ಪ್ರಮಾಣದಲ್ಲಿ ಚೇತರಿಕೆ ಕಂಡಿವೆ. ಒಣಗುತ್ತಿರುವ ಪ್ರದೇಶಗಳಲ್ಲಿ ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಕುಡಿಯುವ ನೀರಿನ ಸಮಸ್ಯೆ ಇರುವ ಪ್ರದೇಶಗಳಲ್ಲಿ ಬೋರ್‌ವೆಲ್, ಪಂಪ್‌ಸೆಟ್ ದುರಸ್ತಿ, ಟ್ಯಾಂಕರ್ ಮೂಲಕ ನೀರು ಪೂರೈಕೆ ಹಾಗೂ ತಾತ್ಕಾಲಿಕ ಪೈಪ್‌ಲೈನ್ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಪಂ ಸಿಇಒ ಕೆ.ಆರ್. ನಂದಿನಿ ತಿಳಿಸಿದರು.

Leave a Reply

Your email address will not be published. Required fields are marked *