‘ಬಡ ಮಕ್ಕಳು ಬರಿಗಾಲಿನಲ್ಲಿ ಶಾಲೆಗೆ, ಸಿಎಂಗೆ ದುಬಾರಿ ಶಾಲು’: ಡಿಕೆಶಿ ವಿರುದ್ಧ ಆರ್. ಅಶೋಕ್ ವಾಗ್ದಾಳಿ

0
RAshok_-750x442-1-300x177-4

ಬೆಂಗಳೂರು: ಶೈಕ್ಷಣಿಕ ವರ್ಷ ಆರಂಭವಾಗಿ ಮೂರು ತಿಂಗಳು ಕಳೆದರೂ ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸದಿರುವ ವಿಚಾರ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದು, ಕೂಡಲೇ ಮಕ್ಕಳಿಗೆ ಶೂ-ಸಾಕ್ಸ್ ವಿತರಿಸುವಂತೆ ಆಗ್ರಹಿಸಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅಶೋಕ್, “ಲಕ್ಷಾಂತರ ರೂಪಾಯಿ ಮೌಲ್ಯದ Louis Vuitton ಬ್ರ್ಯಾಂಡ್ ಶಾಲು ಧರಿಸಿ ಮೆರೆಯುವ ನಿಮಗೆ ಸರ್ಕಾರಿ ಶಾಲೆಯ ಬಡ ಮಕ್ಕಳು ಬರಿಗಾಲಿನಲ್ಲಿ ಶಾಲೆಗೆ ಹೋಗುತ್ತಿರುವುದು ಕಾಣುತ್ತಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಶೈಕ್ಷಣಿಕ ವರ್ಷ ಆರಂಭವಾಗಿ ಮೂರು ತಿಂಗಳು ಕಳೆದಿದ್ದರೂ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಇನ್ನೂ ಶೂ ಮತ್ತು ಸಾಕ್ಸ್ ನೀಡಿಲ್ಲ ಎಂದು ಅವರು ಆರೋಪಿಸಿದ್ದಾರೆ. ಇದರ ಜೊತೆಗೆ, ಸಕ್ಕರೆ ಬೆಲೆ ಏರಿಕೆಯ ನೆಪವೊಡ್ಡಿ ಕೆಲವೆಡೆ ಮಕ್ಕಳಿಗೆ ನೀಡುತ್ತಿದ್ದ ರಾಗಿ ಗಂಜಿಯನ್ನೂ ಸ್ಥಗಿತಗೊಳಿಸಲಾಗಿದೆ ಎಂದು ದೂರಿದ್ದಾರೆ.

“ಬಡ ಮಕ್ಕಳ ಹೊಟ್ಟೆಗೆ ಹೊಡೆದು, ಅವರ ಕಾಲಿಗೂ ಶೂ-ಸಾಕ್ಸ್ ಇಲ್ಲದಂತೆ ಮಾಡುವುದು ನಿಮ್ಮ ಗ್ಯಾರಂಟಿ ಸರ್ಕಾರದ ಸಾಧನೆಯೇ?” ಎಂದು ಅಶೋಕ್ ಟೀಕಿಸಿದ್ದಾರೆ.

ಮುಖ್ಯಮಂತ್ರಿ ಮತ್ತು ಸಚಿವರಿಗೆ ಸರ್ಕಾರಿ ಕಟ್ಟಡಗಳ ನವೀಕರಣ, ಡಿನ್ನರ್ ಪಾರ್ಟಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡಲು ಹಣವಿದೆ. ಆದರೆ ಬಡ ಕುಟುಂಬಗಳ ಮಕ್ಕಳಿಗೆ ಒಂದು ಜೋಡಿ ಶೂ ಮತ್ತು ಸಾಕ್ಸ್ ನೀಡಲು ಸರ್ಕಾರದ ಬಳಿ ಅನುದಾನವಿಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ದಿನಕ್ಕೊಂದು ಬಣ್ಣಬಣ್ಣದ ದುಬಾರಿ Louis Vuitton ಶಾಲು ಹಾಕುವ ಮುಖ್ಯಮಂತ್ರಿಗಳಿಗೆ ಸರ್ಕಾರಿ ಶಾಲೆಯ ಬಡ ಮಕ್ಕಳಿಗೆ ಶೂ-ಸಾಕ್ಸ್ ಕೊಡುವ ಮನಸ್ಸಿಲ್ಲ!

ಮುಖ್ಯಮಂತ್ರಿ @DKShivakumar ಅವರೇ, ಲಕ್ಷಾಂತರ ರೂಪಾಯಿ ಮೌಲ್ಯದ Louis Vuitton ಬ್ರ್ಯಾಂಡ್ ಶಾಲು ಹೊದ್ದು ಮೆರೆಯುವ ನಿಮಗೆ, ಸರ್ಕಾರಿ ಶಾಲೆಯ ಬಡ ಮಕ್ಕಳು ಬರಿಗಾಲಿನಲ್ಲಿ ಶಾಲೆಗೆ… pic.twitter.com/hmD0B41ZHO

— R. Ashoka (@RAshokaBJP) August 31, 2026

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ, ಕುಡಿಯುವ ನೀರು ಮತ್ತು ಶೌಚಾಲಯದ ಸಮಸ್ಯೆಗಳಿವೆ. ಇದೀಗ ಮಕ್ಕಳಿಗೆ ಅಗತ್ಯವಾದ ಶೂ-ಸಾಕ್ಸ್ ವಿತರಣೆ ಹಾಗೂ ರಾಗಿ ಗಂಜಿ ವಿಚಾರದಲ್ಲೂ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿದ್ದಾರೆ.

“ಸರ್ಕಾರಿ ಶಾಲೆಗಳನ್ನು ದುರ್ಬಲಗೊಳಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುಕೂಲ ಮಾಡಿಕೊಡುವುದೇ ಸರ್ಕಾರದ ಉದ್ದೇಶವೇ?” ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ತಕ್ಷಣ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ವಿತರಿಸಬೇಕು ಮತ್ತು ರಾಗಿ ಗಂಜಿ ಯೋಜನೆಯನ್ನು ಪುನರಾರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ. ಇಲ್ಲವಾದರೆ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಒಗ್ಗೂಡಿಸಿ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *