ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

0
Russia-Ukraine-conflict-planes

ಕೀವ್: ಉಕ್ರೇನ್‌ನಾದ್ಯಂತ ರಷ್ಯಾ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಯಲ್ಲಿ ಭಾರತೀಯ ಪ್ರಜೆ ಸೇರಿದಂತೆ ಕನಿಷ್ಠ 12 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತಿಳಿಸಿದ್ದಾರೆ.

ಕಳೆದ ರಾತ್ರಿ ಆರಂಭವಾದ ದಾಳಿಯ ಬಳಿಕ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಮುಂದುವರಿದಿವೆ. ರಾಜಧಾನಿ ಕೀವ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು 350 ತುರ್ತು ಸೇವಾ ಸಿಬ್ಬಂದಿಯನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಝೆಲೆನ್ಸ್ಕಿ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ತಿಳಿಸಿದ್ದಾರೆ.

ರಷ್ಯಾ ನಡೆಸಿದ ದಾಳಿಯಲ್ಲಿ ಜೆಟ್ ಚಾಲಿತ ಡ್ರೋನ್‌ಗಳು ಹಾಗೂ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ವ್ಯಾಪಕವಾಗಿ ಬಳಸಲಾಗಿದ್ದು, ವಸತಿ ಕಟ್ಟಡಗಳು ಮತ್ತು ನಾಗರಿಕ ಮೂಲಸೌಕರ್ಯಗಳಿಗೆ ಹಾನಿಯಾಗಿದೆ ಎಂದು ಅವರು ಹೇಳಿದ್ದಾರೆ.

ಕೈವ್‌ನ ರೈಲ್ವೆ ಡಿಪೋ ಮೇಲೆ ನಡೆದ ದಾಳಿಯಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಝೆಲೆನ್ಸ್ಕಿ ತಿಳಿಸಿದ್ದಾರೆ. ಬೋರಿಸ್ಪಿಲ್‌ನಲ್ಲಿ ಐದು ಅಂತಸ್ತಿನ ವಸತಿ ಕಟ್ಟಡಕ್ಕೆ ಹಾನಿಯಾಗಿದ್ದು, 50 ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ನಗರದಲ್ಲಿ ನಾಲ್ವರು ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಖೆರ್ಸನ್, ಡೊನೆಟ್ಸ್ಕ್, ಜಪೋರಿಝಿಯಾ, ಖಾರ್ಕಿವ್, ಚೆರ್ನಿಹಿವ್, ಜೈಟೊಮಿರ್, ಸುಮಿ ಮತ್ತು ಡ್ನಿಪ್ರೊ ಸೇರಿದಂತೆ ಹಲವು ಪ್ರದೇಶಗಳ ಮೇಲೂ ದಾಳಿ ನಡೆದಿದೆ.

ಒಡೆಸಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡ್ರೋನ್ ಮತ್ತು ಮಾರ್ಗದರ್ಶಿತ ವೈಮಾನಿಕ ಬಾಂಬ್ ದಾಳಿಗಳು ಮುಂದುವರಿದಿದ್ದು, ಸಾವಿರಾರು ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಪೂರೈಕೆ ಪುನಃಸ್ಥಾಪಿಸಲು ಕಾರ್ಯಾಚರಣೆ ನಡೆಯುತ್ತಿದೆ ಎಂದು ಝೆಲೆನ್ಸ್ಕಿ ತಿಳಿಸಿದ್ದಾರೆ.

ರೊಮೇನಿಯಾ ಗಡಿಯಲ್ಲಿನ ಗಡಿ ದಾಟುವಿಕೆ ಮತ್ತು ರಫ್ತು ಮೂಲಸೌಕರ್ಯಗಳ ಮೇಲೂ ದಾಳಿ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.

ರಷ್ಯಾ ಗರಿಷ್ಠ ಪ್ರಮಾಣದ ಹಾನಿ ಉಂಟುಮಾಡುವ ಉದ್ದೇಶದಿಂದ ದಾಳಿಗಳನ್ನು ನಡೆಸುತ್ತಿದೆ ಎಂದು ಆರೋಪಿಸಿರುವ ಝೆಲೆನ್ಸ್ಕಿ, ಉಕ್ರೇನ್‌ಗೆ ವಾಯು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

PURL ಹಾಗೂ ದ್ವಿಪಕ್ಷೀಯ ಒಪ್ಪಂದಗಳ ಮೂಲಕ ರಕ್ಷಣಾ ನೆರವು ನೀಡುತ್ತಿರುವ ರಾಷ್ಟ್ರಗಳಿಗೆ ಧನ್ಯವಾದ ಸಲ್ಲಿಸಿದ ಅವರು, ಮುಂಬರುವ ಶರತ್ಕಾಲದಲ್ಲಿ ಇಂತಹ ನೆರವು ಮತ್ತಷ್ಟು ಹೆಚ್ಚಬೇಕಿದೆ ಎಂದು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *