ಕಾವೇರಿ ವಿವಾದ: ಸುಪ್ರೀಂ ಕೋರ್ಟ್‌ ಮೊರೆ ಹೋಗಲು ಕರ್ನಾಟಕ ತಯಾರಿ

0
krs-750x450-1-1

ಬೆಂಗಳೂರು: ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್‌ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಜಲ ಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಜತೆ ಈ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ. ಕಾನೂನು ತಜ್ಞರ ಸಲಹೆ ಪಡೆದು ಸೆ.10ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆದಿದೆ. ಇದರ ಜತೆಗೆ CWRC ಮುಂದೆಯೂ ಮರುಪರಿಶೀಲನಾ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದರು.

CWRC ಆದೇಶವನ್ನು CWMA ಕೂಡ ಎತ್ತಿಹಿಡಿದಿದೆ. ಆದರೆ ರಾಜ್ಯದ ಜಲಾಶಯಗಳ ಸ್ಥಿತಿ ಕಳವಳಕಾರಿಯಾಗಿದ್ದು, ನೀರು ಬಿಡಲು ರಾಜ್ಯದಲ್ಲೇ ಕೊರತೆ ಎದುರಾಗಿದೆ ಎಂದು ಸಚಿವರು ಹೇಳಿದರು.

ಸದ್ಯ ಕುಡಿಯುವ ನೀರಿಗೆ ಆದ್ಯತೆ ನೀಡಬೇಕಾಗಿದೆ. ಜತೆಗೆ ಬತ್ತಿರುವ ಕೆರೆ-ಕಟ್ಟೆಗಳನ್ನು ತುಂಬಿಸುವ ಜವಾಬ್ದಾರಿಯೂ ರಾಜ್ಯದ ಮೇಲಿದೆ. ಗೌರಿ-ಗಣೇಶ ಹಬ್ಬದ ಬಳಿಕ ಉತ್ತಮ ಮಳೆಯಾದರೆ ಮಾತ್ರ ಪರಿಸ್ಥಿತಿ ಸುಧಾರಿಸಬಹುದು ಎಂದು ಅವರು ಆಶಿಸಿದರು.

“ಈ ಬಾರಿ ತಮಿಳುನಾಡಿಗೆ ಈಗಾಗಲೇ ಸುಮಾರು 30 ಟಿಎಂಸಿ ನೀರು ನೀಡಲಾಗಿದೆ. ಹಿಂದೆ 100 ಟಿಎಂಸಿ ನೀರು ಬಿಡಲಾಗಿತ್ತು. ಆದರೂ ತಮಿಳುನಾಡು ನಿರಂತರವಾಗಿ ಒತ್ತಡ ಹೇರುತ್ತಿದೆ” ಎಂದು ಚಲುವರಾಯಸ್ವಾಮಿ ಹೇಳಿದರು.

ಕಾವೇರಿ ವಿಚಾರದಲ್ಲಿ ರಾಜ್ಯದ ಹಿತ ಕಾಪಾಡಲು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ವಿಶೇಷ ವಕೀಲರನ್ನು ನೇಮಿಸುವ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಲಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಲಹೆಯನ್ನೂ ಪರಿಗಣಿಸಲಾಗುವುದು ಎಂದರು.

Leave a Reply

Your email address will not be published. Required fields are marked *