ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಹೈಕೋರ್ಟ್ ಪೀಠ ಸ್ಥಾಪನೆಗೆ ಹೆಚ್ಚಿದ ಒತ್ತಡ, ಸಿಎಂ, ಗೃಹ ಸಚಿವರಿಗೆ ವಕೀಲರ ನಿಯೋಗ ಮನವಿ

0
Manoraj-and-Advocates-Meet-CM-DKS-Magalore-High-Court-Issue-new

ಮಂಗಳೂರು: ಕರಾವಳಿ ಕರ್ನಾಟಕದ ಜನರಿಗೆ ನ್ಯಾಯದ ಲಭ್ಯತೆ ಸುಲಭವಾಗುವಂತೆ ಧಾರವಾಡ ಮತ್ತು ಕಲಬುರಗಿ ಮಾದರಿಯಲ್ಲಿ ಮಂಗಳೂರಿನಲ್ಲೂ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಅಥವಾ ಶಾಶ್ವತ ಪೀಠ ಸ್ಥಾಪಿಸಬೇಕು ಎಂದು ಮಂಗಳೂರಿನ ವಕೀಲರ ನಿಯೋಗ ಆಗ್ರಹಿಸಿದೆ.

ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆಯ ಸಂದರ್ಭದಲ್ಲಿ (ಶುಕ್ರವಾರ) ವಕೀಲರ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ವಿವಿಧ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿತು.

ಪೀಠ ಸ್ಥಾಪನೆಗೆ ಸಂಪುಟದ ಅನುಮೋದನೆ ಅಗತ್ಯ:

ಮಂಗಳೂರು ವಕೀಲರ ಸಂಘದ ಮಾಜಿ ಉಪಾಧ್ಯಕ್ಷರೂ ಆದ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ್ ನೇತೃತ್ವದ ನಿಯೋಗ, ಹಲವು ವರ್ಷಗಳಿಂದ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಲಾಗುತ್ತಿದ್ದರೂ ಈವರೆಗೆ ಸರ್ಕಾರಗಳಿಂದ ನಿರೀಕ್ಷಿತ ಸ್ಪಂದನೆ ದೊರೆತಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ ತಂದಿತು.

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಗತ್ಯವಿರುವ ನ್ಯಾಯಾಂಗ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಬೇಕು. ಸರ್ಕ್ಯೂಟ್ ಅಥವಾ ಶಾಶ್ವತ ಪೀಠ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟದ ಅನುಮೋದನೆ ನೀಡಬೇಕು ಎಂದು ಮನವಿ ಮಾಡಿತು.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ ಮತ್ತು ಬೆಳ್ತಂಗಡಿ ಸೇರಿದಂತೆ ವಿವಿಧೆಡೆ ನ್ಯಾಯಾಂಗ ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯ ಅನುದಾನವನ್ನು ಕಾಲಮಿತಿಯಲ್ಲಿ ಬಿಡುಗಡೆ ಮಾಡುವಂತೆಯೂ ಒತ್ತಾಯಿಸಲಾಯಿತು.

ವಕೀಲರ ವಸತಿ ಬಡಾವಣೆಗೆ ಭೂಮಿ

ವಕೀಲರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವ ಜತೆಗೆ ಅಗ್ಗದ ದರದಲ್ಲಿ ನಿವೇಶನ ಒದಗಿಸಬೇಕು. ವಕೀಲರ ವಸತಿ ಬಡಾವಣೆ ನಿರ್ಮಿಸಲು ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಸೂಕ್ತ ಸರ್ಕಾರಿ ಭೂಮಿ ಮಂಜೂರು ಮಾಡಬೇಕು ಎಂದು ಪ್ರತ್ಯೇಕ ಮನವಿ ಸಲ್ಲಿಸಲಾಯಿತು.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನೂ ಭೇಟಿ ಮಾಡಿ ಪ್ರತ್ಯೇಕ ಮನವಿ ಸಲ್ಲಿಸಿದ ಮನೋರಾಜ್ ರಾಜೀವ್ ನೇತೃತ್ವದ ನಿಯೋಗ, ಮಂಗಳೂರು ಕೇಂದ್ರ ಕಾರಾಗೃಹದ ಮೊಬೈಲ್ ಸಿಗ್ನಲ್ ಜಾಮ್ಮರ್‌ನಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉಂಟಾಗುತ್ತಿರುವ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಬಗೆಹರಿಸುವಂತೆಯೂ ಒತ್ತಾಯಿಸಲಾಯಿತು.

ಸಿಎಂ, ಗೃಹಸಚಿವರ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮನೋರಾಜ್ ರಾಜೀವ್, ನ್ಯಾಯಾಂಗ ಮೂಲಸೌಕರ್ಯ ಬಲಪಡಿಸುವುದು, ನ್ಯಾಯದ ಲಭ್ಯತೆ ಸುಧಾರಿಸುವುದು ಹಾಗೂ ವಕೀಲರ ಮೂಲಸೌಕರ್ಯ ಮತ್ತು ವಸತಿ ಅಗತ್ಯಗಳನ್ನು ಈಡೇರಿಸುವ ಉದ್ದೇಶದಿಂದ ಮನವಿ ಸಲ್ಲಿಸಲಾಗಿದೆ ಎಂದರು.

ಸಿಎಂ ಹಾಗೂ ಗೃಹ ಸಚಿವರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಕರಾವಳಿಯ ವಕೀಲರ ಬೇಡಿಕೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ವಹಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದರು.

ನಿಯೋಗದಲ್ಲಿ ಹಿರಿಯ ವಕೀಲರಾದ ಅಶ್ವಿನಿ ಕುಮಾರ್ ರೈ, ಸುರೇಶ್ ನಾವೂರ್, ಅರುಣ್ ಬಿ.ಪಿ., ವಿನೋದರ್ ಪೂಜಾರಿ, ಪ್ರವೀಣ್ ಕುಮಾರ್ ಅಡ್ಯಾರ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

You may have missed