ರಾಜ್ಯದಲ್ಲಿ ಮೋಡ ಬಿತ್ತನೆಗೆ ಎರಡು ಸಮಿತಿಗಳ ರಚನೆ

ಬೆಂಗಳೂರು: ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಎದುರಿಸಲು ಕೈಗೆತ್ತಿಕೊಂಡಿರುವ ಮೋಡ ಬಿತ್ತನೆ ಕಾರ್ಯಕ್ರಮದ ಸುಗಮ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ ಎರಡು ಪ್ರತ್ಯೇಕ ಸಮಿತಿಗಳನ್ನು ರಚಿಸಿದೆ.
ಕಾರ್ಯಕ್ರಮದ ಸಮಗ್ರ ಉಸ್ತುವಾರಿ, ಮೇಲ್ವಿಚಾರಣೆ ಹಾಗೂ ಪರಿಶೀಲನೆಗಾಗಿ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದೆ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರು ಸಮಿತಿಯ ಅಧ್ಯಕ್ಷರಾಗಿದ್ದು, ಜಲಸಂಪನ್ಮೂಲ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕೃಷಿ ಇಲಾಖೆ ಹಾಗೂ ಕೆಎಸ್ಎನ್ಡಿಎಂಸಿ ಅಧಿಕಾರಿಗಳು ಸದಸ್ಯರಾಗಿದ್ದಾರೆ. ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.
ಮೋಡ ಬಿತ್ತನೆಗೆ ಸಂಬಂಧಿಸಿದ ವೈಜ್ಞಾನಿಕ ಹಾಗೂ ತಾಂತ್ರಿಕ ವಿಷಯಗಳಲ್ಲಿ ಕೆಎಸ್ಎನ್ಡಿಎಂಸಿಗೆ ಮಾರ್ಗದರ್ಶನ ನೀಡಲು ತಾಂತ್ರಿಕ ಸಲಹಾ ಮತ್ತು ಮೌಲ್ಯಮಾಪನ ಸಮಿತಿ ರಚಿಸಲಾಗಿದೆ. ಕೆಎಸ್ಎನ್ಡಿಎಂಸಿ ನಿರ್ದೇಶಕರು ಸಮಿತಿಯ ಅಧ್ಯಕ್ಷರಾಗಿದ್ದು, ಕೃಷಿ ಇಲಾಖೆ, ಭಾರತೀಯ ಹವಾಮಾನ ಇಲಾಖೆ (ಐಎಂಡಿ), ಕರ್ನಾಟಕ ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರ ಸೇರಿದಂತೆ ವಿವಿಧ ಸಂಸ್ಥೆಗಳ ತಜ್ಞರು ಸದಸ್ಯರಾಗಿದ್ದಾರೆ. ಐಐಎಸ್ಸಿ ಪ್ರಾಧ್ಯಾಪಕ ಪ್ರೊ. ನಾಗೇಶ್ ಕುಮಾರ್ ಸೇರಿದಂತೆ ತಜ್ಞರು ಸಮಿತಿಯಲ್ಲಿ ಇರಲಿದ್ದಾರೆ.

ಮೋಡ ಬಿತ್ತನೆ ಕಾರ್ಯಕ್ರಮಕ್ಕೆ ₹28.52 ಕೋಟಿ (ಜಿಎಸ್ಟಿ ಹೊರತುಪಡಿಸಿ) ಅಂದಾಜು ವೆಚ್ಚಕ್ಕೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಜಲಸಂಪನ್ಮೂಲ ಇಲಾಖೆಯ ಕರ್ನಾಟಕ ನೀರಾವರಿ ನಿಗಮ (KNNL) ಮತ್ತು ಕಂದಾಯ ಇಲಾಖೆಯ ಕೆಎಸ್ಎನ್ಡಿಎಂಸಿ ಜಂಟಿಯಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಲಿವೆ.
ಮೋಡ ಬಿತ್ತನೆ ಸೇವೆಯನ್ನು M/s Kyathi Climate Modification Consultants LLP ಸಂಸ್ಥೆಯ ಮೂಲಕ ಪಡೆಯಲು ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಕರ್ನಾಟಕ ಸಾರ್ವಜನಿಕ ಸಂಗ್ರಹಣಾ ಪಾರದರ್ಶಕತೆ ಕಾಯ್ದೆ (KTPP) ಅಡಿಯಲ್ಲಿ ವಿನಾಯಿತಿ ನೀಡಲಾಗಿದೆ.
ಮಳೆ ಕೊರತೆಯಿರುವ ಪ್ರದೇಶಗಳಲ್ಲಿ ಕಾರ್ಯಕ್ರಮವನ್ನು ವೈಜ್ಞಾನಿಕವಾಗಿ ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಈ ಸಮಿತಿಗಳ ಪ್ರಮುಖ ಉದ್ದೇಶವಾಗಿದೆ.
