ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ

0
Chaluvarayaswamy-Cheluvarayaswamy-300x196-2

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಹಾಗೂ ತೀವ್ರ ನೀರಿನ ಅಭಾವದ ಆತಂಕದ ಹಿನ್ನೆಲೆಯಲ್ಲಿ ಸರ್ಕಾರ ಮೋಡ ಬಿತ್ತನೆ ಕಾರ್ಯಕ್ಕೆ ಸಿದ್ಧತೆ ನಡೆಸಿದೆ. ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ ನಡೆಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಸುಮಾರು ₹27 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋಡ ಬಿತ್ತನೆಗೆ ಅಗತ್ಯವಿರುವ ಆಡಳಿತಾತ್ಮಕ ಸಿದ್ಧತೆಗಳು ಪೂರ್ಣಗೊಂಡಿವೆ. ಮೂರು ವಿಶೇಷ ಸಮಿತಿಗಳನ್ನು ರಚಿಸಲಾಗುತ್ತಿದ್ದು, ಮುಂದಿನ ಎರಡು-ಮೂರು ದಿನಗಳಲ್ಲಿ ಆರಂಭಿಕ ತಾಂತ್ರಿಕ ಪರೀಕ್ಷೆ ನಡೆಸಲಾಗುವುದು ಎಂದರು.

ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಮಾನಿಟರಿಂಗ್ ಹಾಗೂ ತಾಂತ್ರಿಕ ಸಮಿತಿಗಳನ್ನು ರಚಿಸಿ, ಅವುಗಳ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಈಗಾಗಲೇ ಎರಡು ಉನ್ನತ ಮಟ್ಟದ ಸಭೆಗಳು ನಡೆದಿದ್ದು, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.

“ಶೇ.30ರಷ್ಟು ಯಶಸ್ಸು ಸಿಕ್ಕರೂ ಅನುಕೂಲವಾಗಲಿದೆ. ಈ ಹಿಂದೆ ಮೂರು ಬಾರಿ ಮೋಡ ಬಿತ್ತನೆ ನಡೆಸಲಾಗಿದೆ. ಪ್ರಸ್ತುತ ಮಳೆ ಕೊರತೆ ಇರುವುದರಿಂದ ರೈತರ ಒತ್ತಡವೂ ಇದೆ. ಹೀಗಾಗಿ ಮೋಡ ಬಿತ್ತನೆಗೆ ಮುಂದಾಗಿದ್ದೇವೆ” ಎಂದು ಚಲುವರಾಯಸ್ವಾಮಿ ತಿಳಿಸಿದರು.

ಮೋಡ ಬಿತ್ತನೆ ವೇಳೆ ಮೋಡಗಳ ಲಭ್ಯತೆಯನ್ನು ಆಧರಿಸಿ ಕಾರ್ಯಾಚರಣೆ ನಡೆಸಲಾಗುವುದು. 60 ದಿನಗಳ ಅವಧಿಯಲ್ಲಿ ಗಂಟೆಗಳ ಆಧಾರದ ಮೇಲೆ ಯೋಜನೆ ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದರು.

ಮೋಡ ಬಿತ್ತನೆಯ ಯಶಸ್ಸಿನ ಪ್ರಮಾಣ ಕಡಿಮೆ ಇರುವುದನ್ನು ಸರ್ಕಾರ ಅರಿತಿದ್ದರೂ, ಬರ ಪರಿಸ್ಥಿತಿಯಲ್ಲಿ ಮಳೆಯಾಗುವ ಸಾಧ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ಪ್ರಯತ್ನ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *