ಬರ ಪರಿಹಾರಕಾಗಿ ಮುಂದಿನ ವಾರದಲ್ಲಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ; ಪರಮೇಶ್ವರ್

0
DrGParameshwar-minister

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿಯ ಕುರಿತು ಮೌಲ್ಯಮಾಪನ ನಡೆಸಿದ ಬಳಿಕ ಆಗಸ್ಟ್ ಅಂತ್ಯ ಅಥವಾ ಸೆಪ್ಟೆಂಬರ್ ಮೊದಲ ವಾರದೊಳಗೆ ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ಕೋರಿ ಜ್ಞಾಪಕ ಪತ್ರ ಸಲ್ಲಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ.

ಮೈಸೂರಿನಲ್ಲಿ ಶನಿವಾರ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಮುಂದಿನ 15 ದಿನಗಳವರೆಗೆ ಪರಿಸ್ಥಿತಿಯನ್ನು ಪರಿಶೀಲಿಸಲಾಗುವುದು. ಅಗತ್ಯವಿದ್ದರೆ ಇನ್ನಷ್ಟು ತಾಲ್ಲೂಕುಗಳನ್ನು ಪಟ್ಟಿಗೆ ಸೇರಿಸಲಾಗುವುದು ಎಂದರು.

ಬೆಳೆ ನಷ್ಟದ ಅಂದಾಜು ಕಾರ್ಯ ನಡೆಯುತ್ತಿದ್ದು, ಅದರ ಆಧಾರದ ಮೇಲೆ ಕೇಂದ್ರಕ್ಕೆ ಜ್ಞಾಪಕ ಪತ್ರ ಸಿದ್ಧಪಡಿಸಲಾಗುವುದು. ಬಳಿಕ ಕೇಂದ್ರದ ತಂಡಗಳು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ನಂತರ ಪರಿಹಾರ ಬಿಡುಗಡೆ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದರು.

ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಒದಗಿಸುವುದು ಹಾಗೂ ವಲಸೆ ತಡೆಯಲು ಉದ್ಯೋಗಾವಕಾಶ ಕಲ್ಪಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ. ರೈತರಿಗೆ ಪ್ರತಿ ಎಕರೆಗೆ ನೀಡಬೇಕಾದ ಪರಿಹಾರದ ಬಗ್ಗೆಯೂ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪರಮೇಶ್ವರ ತಿಳಿಸಿದರು.

2023ರ ಬರಗಾಲದಲ್ಲಿ ರಾಜ್ಯಕ್ಕೆ ಸುಮಾರು ₹39,000 ಕೋಟಿ ನಷ್ಟವಾಗಿದ್ದು, ₹18,000 ಕೋಟಿ ಪರಿಹಾರ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಬಳಿಕ ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ₹3,500 ಕೋಟಿ ಬಿಡುಗಡೆಯಾಗಿತ್ತು ಎಂದು ಅವರು ನೆನಪಿಸಿದರು.

ಈ ಬಾರಿ ಅಂತಹ ಪರಿಸ್ಥಿತಿ ಮರುಕಳಿಸಬಾರದು ಎಂದು ಕೇಂದ್ರಕ್ಕೆ ಮನವಿ ಮಾಡಿರುವುದಾಗಿ ತಿಳಿಸಿದ ಪರಮೇಶ್ವರ, SDRF ಅಡಿಯಲ್ಲಿ ಕೇಂದ್ರದ ಪಾಲಿನ ₹1,200 ಕೋಟಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಹಣ ಬಿಡುಗಡೆಯಾದ ಬಳಿಕ ಒಂದು ವಾರ ಅಥವಾ 10 ದಿನಗಳೊಳಗೆ ರೈತರಿಗೆ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. SDRFನಲ್ಲಿ ಕೇಂದ್ರ ಮತ್ತು ರಾಜ್ಯದ ಕೊಡುಗೆ 75:25ರ ಅನುಪಾತದಲ್ಲಿರುತ್ತದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *