ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

ಹನೂರು: ಮಲೆ ಮಹದೇಶ್ವರ ಕ್ಷೇತ್ರವನ್ನು ಸ್ವಚ್ಛ, ಸುಂದರ ಹಾಗೂ ಪ್ಲಾಸ್ಟಿಕ್ ಮುಕ್ತ ಧಾರ್ಮಿಕ ಕ್ಷೇತ್ರವನ್ನಾಗಿ ರೂಪಿಸುವುದು ಪ್ರಾಧಿಕಾರದ ಪ್ರಮುಖ ಆದ್ಯತೆಯಾಗಿದ್ದು, ಭಕ್ತರು, ಸ್ಥಳೀಯ ಸಂಘಟನೆಗಳು ಹಾಗೂ ವ್ಯಾಪಾರಸ್ಥರ ಸಹಭಾಗಿತ್ವದೊಂದಿಗೆ ಪ್ಲಾಸ್ಟಿಕ್ ಬಳಕೆಯನ್ನು ಹಂತಹಂತವಾಗಿ ಕಡಿಮೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ನೂತನ ಕಾರ್ಯದರ್ಶಿ ಪುರುಷೋತ್ತಮ್ ತಿಳಿಸಿದರು.

ಪರಿಸರ ವಾರಿಯರ್ಸ್ ಗ್ರೂಪ್ ಮೈಸೂರು ಹಾಗೂ ಭಾರತೀಯ ಕಿಸಾನ್ ಸಂಘ, ಚಾಮರಾಜನಗರ ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆ ಧಾರ್ಮಿಕ ಕ್ಷೇತ್ರಗಳಲ್ಲೂ ಅತ್ಯಂತ ಮಹತ್ವದ್ದಾಗಿದ್ದು, ಪರಿಸರ ವಾರಿಯರ್ಸ್ ಮತ್ತು ಭಾರತೀಯ ಕಿಸಾನ್ ಸಂಘದ ಮುಖಂಡರು ನೀಡಿರುವ ಸಲಹೆಗಳು ಉಪಯುಕ್ತವಾಗಿವೆ. ಭಕ್ತರು, ವ್ಯಾಪಾರಸ್ಥರು ಹಾಗೂ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಲೆ ಮಹದೇಶ್ವರ ಕ್ಷೇತ್ರವನ್ನು ರಾಜ್ಯಕ್ಕೇ ಮಾದರಿಯಾಗುವ ಪ್ಲಾಸ್ಟಿಕ್ ಮುಕ್ತ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಲು ಸಮಗ್ರ ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಈ ವೇಳೆ ಪರಿಸರ ವಾರಿಯರ್ಸ್ ಗ್ರೂಪ್ ಸದಸ್ಯರು, ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದ ಪ್ರಮಾಣವೂ ಹೆಚ್ಚುತ್ತಿದ್ದು, ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಗಮನ ಸೆಳೆದರು. ಪ್ಲಾಸ್ಟಿಕ್ ಬಳಕೆಗೆ ಪರ್ಯಾಯ ವ್ಯವಸ್ಥೆಗಳನ್ನು ಜಾರಿಗೆ ತಂದು, ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳುವ ಮೂಲಕ ಕ್ಷೇತ್ರವನ್ನು ಹಂತಹಂತವಾಗಿ ಪ್ಲಾಸ್ಟಿಕ್ ಮುಕ್ತಗೊಳಿಸಬೇಕು ಎಂದು ಮನವಿ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಪರಿಸರ ವಾರಿಯರ್ಸ್ ಗ್ರೂಪ್ನ ಪಿ. ಮಂಜುನಾಥ್ ಈರಪ್ಪನಕೊಪ್ಪಲು, ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಪಿಡಿಒ ಕಿರಣ್ ಕುಮಾರ್, ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಎಎಸ್ಐ ಗೋವಿಂದರಾಜು, ಭಾರತೀಯ ಕಿಸಾನ್ ಸಂಘದ ಚಾಮರಾಜನಗರ ಜಿಲ್ಲಾ ಉಪಾಧ್ಯಕ್ಷ ಮಣಿಗಾರ್ ಪ್ರಸಾದ್, ಕೋಶಾಧ್ಯಕ್ಷ ಲಿಂಗರಾಜು, ಹನೂರು ತಾಲೂಕು ಅಧ್ಯಕ್ಷ ಹರೀಶ್, ತಾಲೂಕು ಕಾರ್ಯದರ್ಶಿ ಸದಾನಂದ, ಸದಾಶಿವ ಬೆಟ್ಟಪ್ಪ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
