ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ದಿಗ್ಬಂಧನ: ಬಿಜೆಪಿ ಖಂಡನೆ

0
bjp - chalavadi Narayanaswami

ಬೆಂಗಳೂರು: ಸಾಂವಿಧಾನಿಕ ಹುದ್ದೆ ವಿಪಕ್ಷದ ನಾಯಕ ಸ್ಥಾನದಲ್ಲಿರುವ ಶೋಷಿತ ಸಮುದಾಯಗಳ ನಾಯಕರೂ ಆದ ಛಲವಾದಿ ನಾರಾಯಣ ಸ್ವಾಮಿ ಅವರನ್ನು ಚಿತ್ತಾಪುರದ ಅತಿಥಿ ಗೃಹದಲ್ಲಿ ದಿಗ್ಬಂಧನದಲ್ಲಿರಿಸಿದ್ದ ಘಟನೆ ಅತ್ಯಂತ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ನಾರಾಯಣಸ್ವಾಮಿಯವರು ಕಾಂಗ್ರೆಸ್ ಗೂಂಡಾ ಬೆಂಬಲಿಗರ ದಿಗ್ಭಂದನ ಅನುಭವಿಸಿದ್ದು ಕರ್ನಾಟಕದಲ್ಲಿ ಪಾಳೆಗಾರಿಕೆ ಸಂಸ್ಕೃತಿಯ ಜೀವಂತಿಕೆಯನ್ನು ಪ್ರತಿಬಿಂಬಿಸಿದೆ ಎಂದವರು ಪ್ರತಿಕ್ರಿಯಿಸಿದ್ದಾರೆ.

ಪೊಲೀಸರು ವಿಪಕ್ಷದ ನಾಯಕರೊಬ್ಬರಿಗೆ ರಕ್ಷಣೆ ನೀಡಲಾರದ ಪರಿಸ್ಥಿತಿ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. ಟೀಕೆ- ಟಿಪ್ಪಣಿಗಳನ್ನು ಆರೋಗ್ಯಕರ ಮನಸ್ಸಿನಿಂದ ಸ್ವೀಕರಿಸಬೇಕು, ಅದಕ್ಕೆ ಸಮರ್ಥವಾಗಿ ಪ್ರತ್ಯುತ್ತರ ನೀಡಬೇಕು ಇದು ಪ್ರಜಾಪ್ರಭುತ್ವದ ಸುಂದರತೆ ಹಾಗೂ ರಾಜಕಾರಣ ಸಂಸ್ಕೃತಿಯ ಧ್ಯೋತಕವಾಗುತ್ತದೆ ಎಂದು ವಿಜಯೇಂದ್ರ ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ. ಕಲಬುರ್ಗಿ ಜಿಲ್ಲೆ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿಯ ಸರ್ವಾಧಿಕಾರಿ ನೆರಳಿನಲ್ಲಿ ಬಂದವರ ಕಪಿಮುಷ್ಠಿಯಲ್ಲಿದೆ. ಇಲ್ಲಿ ಪ್ರಜಾಪ್ರಭುತ್ವವೂ ಇಲ್ಲ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದ ಸಂವಿಧಾನಕ್ಕೆ ಗೌರವವೂ ಇಲ್ಲ ಎನ್ನುವುದು ನಾರಾಯಣಸ್ವಾಮಿಯವರ ದಿಗ್ಬಂಧನ ಸಾಕ್ಷಿ ಹೇಳುತ್ತಿದೆ ಎಂದವರು ಬಣ್ಣಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ ಸಾಂವಿಧಾನಿಕ ಹುದ್ದೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಗೌರವವಿದ್ದರೆ ಈ ಕೂಡಲೇ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ನಾರಾಯಣಸ್ವಾಮಿ ಅವರಿಗೆ ಸೂಕ್ತ ಭದ್ರತೆ ಒದಗಿಸಿ ದಿಬ್ಬಂದನ ವಿಧಿಸಿದ ಗೂಂಡಾಗಳ ಮೇಲೆ ಕ್ರಮ ಜರುಗಿಸಲಿ. ಅವರು ನಿರ್ಲಿಪ್ತರಾದರೆ ತಾವೂ ಪಾಳೇಗಾರಿಕೆ ಸಂಸ್ಕೃತಿಯ ಭಾಗ ಎಂದು ನಿರೂಪಿಸಿಕೊಂಡಂತಾಗುತ್ತದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಭಾರತೀಯ ಜನತಾ ಪಾರ್ಟಿ ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿಯಲು ಶೋಷಿತ ಸಮುದಾಯದಿಂದ ಮೇಲೇರಿ ಬಂದ ಛಲವಾದಿ ನಾರಾಯಣಸ್ವಾಮಿ ಅವರಂತಹ ನಾಯಕನ ರಕ್ಷಣೆಗೆ ಬೆನ್ನಿಗೆ ನಿಲ್ಲುವುದು ಆದ್ಯತೆಯಾಗಿ ಪರಿಗಣಿಸಿದೆ ಎಂದವರು ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed