KSRTCಯಲ್ಲಿ ಎಲ್ಲಾ ಧರ್ಮೀಯರಿಗೂ ಸಮಾನ ರೂಲ್ಸ್ ಎಂದ ಸಚಿವರು

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ನಿಯಮ ಬಾಹಿರವಾಗಿ ನಮಾಜ್ ಮಾಡಿರುವ ಚಾಲಕ-ಕಂ-ನಿರ್ವಾಹಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ ನೀಡಿದ್ದಾರೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಸಚಿವರು, 29-04-2025 ರ ಸಂಜೆ ಹುಬ್ಬಳ್ಳಿಯಿಂದ ಹಾವೇರಿಗೆ ಕಾರ್ಯಾಚರಣೆ ಯಾಗುತ್ತಿದ್ದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ-ಕಂ-ನಿರ್ವಾಹಕ, ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿರುವ ಬಗ್ಗೆ ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಬಗ್ಗೆ ಉಲ್ಲೇಖ ಮಾಡಿದ್ದಾರೆ. .
ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಕೆಲವೊಂದು ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿದೆ. ಪ್ರತಿಯೊಬ್ಬ ವ್ಯಕ್ತಿಗೂ ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿದ್ದರೂ ಸಹ ಸಾರ್ವಜನಿಕ ಸೇವೆಯಲ್ಲಿರುವವರು, ಕರ್ತವ್ಯದ ವೇಳೆ ಹೊರತುಪಡಿಸಿ ತಮ್ಮ ತಮ್ಮ ಧರ್ಮವನ್ನು ಪಾಲಿಸಬಹುದಾಗಿದೆ. ಆದರೆ, ಕರ್ತವ್ಯದ ಸಮಯದಲ್ಲಿ ಮಾರ್ಗಮಧ್ಯದಲ್ಲಿ ಬಸ್ ನಿಲ್ಲಿಸಿ, ಬಸ್ ನಲ್ಲಿ ಪ್ರಯಾಣಿಕರು ಇದ್ದಾಗ್ಯೂ ಸಹ ನಮಾಜ್ ಮಾಡಿರುವುದು ಆಕ್ಷೇಪಾರ್ಹ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ವಿಡಿಯೋ ಬಗ್ಗೆ ಕೂಡಲೇ ತನಿಖೆ ನಡೆಸಿ, ಸಂಬಂಧಪಟ್ಟ ಸಿಬ್ಬಂದಿಯು ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಸೂಕ್ತ ಶಿಸ್ತಿನ ಕ್ರಮ ಜರುಗಿಸಬೇಕು, ಇನ್ನು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ರಾಮಲಿಂಗಾ ರೆಡ್ಡಿ ಸೋಷಿಸಿದ್ದಾರೆ.