ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ವಿರುದ್ಧ FIR: ವಿಜಯೇಂದ್ರ ಆಕ್ರೋಶ
ಬೆಂಗಳೂರು: ಮಂಗಳೂರಿನ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ವಿರುದ್ಧ ಪೊಲೀಸರು ಎಫ್.ಐ.ಆರ್. ದಾಖಲಿಸಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಜನಪ್ರತಿನಿಧಿಗಳನ್ನು ಬೆದರಿಸಲು ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ಬಳಸಿಕೊಳ್ಳುತ್ತಿದೆ. ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ವಿರುದ್ಧ ದುರುದ್ದೇಶಪೂರಿತ ಎಫ್ಐಆರ್ ದಾಖಲಿಸಿರುವ ಕ್ರಮ ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳು ನಿರ್ಭಯವಾಗಿ ತಮ್ಮ ಕರ್ತವ್ಯ ನಿರ್ವಹಿಸದಂತೆ ಬೆದರಿಸುವ ಮಾರ್ಗವನ್ನು ಕಾಂಗ್ರೆಸ್ ಅನುಸರಿಸುತ್ತಿದೆ ಎಂದು ವಿಜಯೇಂದ್ರ ದೂರಿದ್ದಾರೆ.
ಈ ಹಿಂದೆಯೂ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಮೇಲೂ ಪೊಲೀಸರು ದೂರು ದಾಖಲಿಸಿಕೊಂಡು ದೌರ್ಜನ್ಯ ಮೆರೆಯಲು ಹೊರಟಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತನ್ನ ಅಸ್ತಿತ್ವಕ್ಕಾಗಿ ತಿಣುಕಾಡುತ್ತಿರುವ ಕಾಂಗ್ರೆಸ್ ಹತಾಶೆಯಿಂದ ಬಿಜೆಪಿ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರನ್ನು ಕಾನೂನು ಸುವ್ಯವಸ್ಥೆಯ ಹೆಸರಿನಲ್ಲಿ ಹತ್ತಿಕ್ಕಲು ಪೊಲೀಸ್ ಠಾಣೆಗಳನ್ನು ಬಳಸಿಕೊಳ್ಳುತ್ತಿರುವುದು ಸಾಂವಿಧಾನಿಕ ವ್ಯವಸ್ಥೆಯನ್ನು ಅಪಮಾನಿಸಿದಂತಿದೆ ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಜನಪ್ರತಿನಿಧಿಗಳನ್ನು ಬೆದರಿಸಲು @INCKarnataka ಸರ್ಕಾರ ಪೊಲೀಸರನ್ನು ಬಳಸಿಕೊಳ್ಳುತ್ತಿದೆ. ಮಂಗಳೂರು ನಗರ ದಕ್ಷಿಣ ಶಾಸಕ ಶ್ರೀ @vedavyasbjp ಅವರ ವಿರುದ್ಧ ದುರುದ್ದೇಶಪೂರಿತ ಎಫ್ಐಆರ್ ದಾಖಲಿಸಿರುವ ಕ್ರಮ ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳು… pic.twitter.com/peJSMuS3JZ
— Vijayendra Yediyurappa (@BYVijayendra) March 5, 2025
ಧಾರ್ಮಿಕ ಕಾರ್ಯಕ್ರಮದಲ್ಲಿ ಗೊಂದಲ ಮೂಡಿಸಲು ಹೊರಟ ಕಾಂಗ್ರೆಸ್ ಪ್ರೇರಿತ ಕಿಡಿಗೇಡಿಗಳ ವರ್ತನೆಯ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಧಾರ್ಮಿಕ ಕಾರ್ಯಕ್ರಮವನ್ನು ಸುಸೂತ್ರವಾಗಿ ಹಾಗೂ ಶಾಂತಿಯುತವಾಗಿ ನೆರವೇರಿಸಲು ತಲ್ಲೀನರಾಗಿದ್ದ ಶಾಸಕ ವೇದವ್ಯಾಸ್ ಕಾಮತ್ ಅವರ ವಿರುದ್ಧ ಆಧಾರ ರಹಿತ ದೂರು ಸ್ವೀಕರಿಸಿ ದಾಖಲಿಸಿರುವ ಎಫ್ಐಆರ್ ಅನ್ನು ಈ ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.