ವನ್ಯಜೀವಿ ಸೇವಾ ಪ್ರಶಸ್ತಿ: ನಾಲ್ವರು ಅರಣ್ಯ ಸಂರಕ್ಷಕರಿಗೆ ವಿಶಿಷ್ಟ ಗೌರವ

ಬೆಂಗಳೂರು: ಭಾರತದ ಪ್ರಮುಖ ಅಗರಬತ್ತಿ ತಯಾರಿಕಾ ಸಂಸ್ಥೆಯಾದ ಸೈಕಲ್ ಪ್ಯೂರ್ ಅಗರಬತ್ತಿ ವತಿಯಿಂದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 14ನೇ ವಾರ್ಷಿಕ ವನ್ಯಜೀವಿ ಸೇವಾ ಪ್ರಶಸ್ತಿ ಸಮಾರಂಭದಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ನಾಲ್ವರು ಅರಣ್ಯ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೆಂಕಟೇಶ್ ಬಾಬು, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ವಿನಯ್ ಕುಮಾರ್ ಇ., ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಸುನಿಲ್ ವಿ. ಬೆಳವಿ ಹಾಗೂ ಕಾವೇರಿ ವನ್ಯಜೀವಿ ವಿಭಾಗದ ಶರಣಪ್ಪ ಅವರಿಗೆ ತಲಾ ₹1 ಲಕ್ಷ ನಗದು ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಕಾರ್ಯಕ್ರಮವು ಕೆಎಸ್ಸಿಎ ಟೈಗರ್ ಕಪ್ 2026 ಕ್ರಿಕೆಟ್ ಟೂರ್ನಿಯ ಸಮಾರೋಪ ಸಮಾರಂಭದ ಅಂಗವಾಗಿ ನಡೆಯಿತು. ವನ್ಯಜೀವಿ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಏಪ್ರಿಲ್ 5ರಿಂದ ಮೇ 10ರವರೆಗೆ ನಡೆದ ಟೂರ್ನಿಯಲ್ಲಿ 12, 14 ಮತ್ತು 16 ವರ್ಷದೊಳಗಿನ ವಿಭಾಗಗಳಲ್ಲಿ 56 ತಂಡಗಳು ಸ್ಪರ್ಧಿಸಿದ್ದವು.

ಕಾರ್ಯಕ್ರಮದಲ್ಲಿ ಮಾಜಿ ಭಾರತೀಯ ಕ್ರಿಕೆಟಿಗ ಹಾಗೂ ಕೆಎಸ್ಸಿಎ ಅಧ್ಯಕ್ಷ ಡಾ. ಬಿ.ಕೆ. ವೆಂಕಟೇಶ್ ಪ್ರಸಾದ್ ಮತ್ತು ಸೈಕಲ್ ಪ್ಯೂರ್ ಅಗರಬತ್ತಿಯ ನಿಖಿಲ್ ರಂಗ ಭಾಗವಹಿಸಿ ಪ್ರಶಸ್ತಿಗಳನ್ನು ಪ್ರದಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವೆಂಕಟೇಶ್ ಪ್ರಸಾದ್, ಕ್ರೀಡೆ ಮತ್ತು ವನ್ಯಜೀವಿ ಸಂರಕ್ಷಣೆಯನ್ನು ಒಟ್ಟುಗೂಡಿಸಿರುವ ಟೈಗರ್ ಕಪ್ ಯುವಜನರಲ್ಲಿ ಪರಿಸರ ಜಾಗೃತಿ ಮೂಡಿಸುವ ಉತ್ತಮ ಪ್ರಯತ್ನವಾಗಿದೆ ಎಂದು ಶ್ಲಾಘಿಸಿದರು.
ನಿಖಿಲ್ ರಂಗ ಮಾತನಾಡಿ, ಅರಣ್ಯ ಮತ್ತು ವನ್ಯಜೀವಿಗಳ ರಕ್ಷಣೆಗೆ ಶ್ರಮಿಸುತ್ತಿರುವ ಅರಣ್ಯ ಸಿಬ್ಬಂದಿಯ ತ್ಯಾಗ ಮತ್ತು ಸೇವೆಯನ್ನು ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.
